ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಲ್ಲಿ ಕಳ್ಳತನ ನಡೆದಿದೆ..!
ಥೀಂ ಪಾರ್ಕ್ ನ ಬಾಗಿಲನ್ನು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ಮೇಲ್ಛಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ.


ಕಾರ್ಕಳದ ಇತಿಹಾಸದಲ್ಲಿ ಇದೊಂದು ದುರ್ದಿನ ಎಂದು ಭಾವಿಸುತ್ತೇನೆ ಎಂದು ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮ ಕ್ಷೇತ್ರವನ್ನು ರಾಜ್ಯದ ಶ್ರೇಷ್ಠ ಪ್ರವಾಸಿ ತಾಣವಾಗಿ ರೂಪಿಸಬೇಕೆಂಬ ಕನಸಿನೊಂದಿಗೆ ಪ್ರಾರಂಭಿಸಿದ ಈ ಮಹತ್ವಾಕಾಂಕ್ಷಿ ಯೋಜನೆ ಸ್ಥಳೀಯ ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿಯವರ ದ್ವೇಷ ಹಾಗೂ ಅಸೂಯೆಯ ರಾಜಕಾರಣಕ್ಕೆ ಬಲಿಯಾಗಿ ಹೋಯ್ತು. ಕಳೆದ ಎರಡು ವರ್ಷದಿಂದ ಈ ಯೋಜನೆಯ ಅಭಿವೃದ್ಧಿಗೆ ಬಿಡಿಕಾಸು ಬಿಡುಗಡೆಯಾಗದಂತೆ ಮಾಡಿ ಪರಶುರಾಮ ಥೀಂ ಪಾರ್ಕ್ ಅಕ್ಷರಶಃ ಪಾಳು ಬಿದ್ದು ಹೋಗುವಂತೆ ಮಾಡಿದರು. ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿಕೊಟ್ಟು ನಳನಳಿಸಬೇಕಿದ್ದ ಈ ಪ್ರವಾಸಿ ತಾಣ ಕಾಂಗ್ರೆಸ್ ನಾಯಕರ ರಾಜಕೀಯದಾಟದಿಂದಾಗಿ ಇಂದು ಕಳ್ಳರು ನುಗ್ಗಿ ಮೇಲ್ಛಾವಣಿಯನ್ನೇ ಕದ್ದೊಯ್ಯುವ ಸ್ಥಿತಿ ನಿರ್ಮಾಣವಾಗಿದೆ.


ಬಹುಶಃ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಉದಯ್ ಕುಮಾರ್ ಶೆಟ್ಟಿಯವರ ಹೊಟ್ಟೆ ಇಂದು ತಣ್ಣಗಾಗಿರಬಹುದು. ಮುಂದಿನ ಚುನಾವಣೆಯವರೆಗೂ ಪರಶುರಾಮ ಥೀಂ ಪಾರ್ಕ್ ಯೋಜನೆಯನ್ನು ಜೀವಂತವಾಗಿ ಇಡಬೇಕೆಂದು ಕಾರ್ಕಳಕ್ಕೆ ಭೇಟಿಕೊಟ್ಟ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರು ಕಾರ್ಕಳ ಕಾಂಗ್ರೆಸ್ ಪಟಾಲಂಗೆ ಫತ್ವಾ ಕೊಟ್ಟಿದ್ದರು. ಅದರ ಫಲವಾಗಿ ಘಜ್ನಿ, ಘೋರಿಗಳು ಹಿಂದು ಶ್ರದ್ಧಾ ಕೇಂದ್ರಗಳನ್ನು ಧ್ವಂಸ ಮಾಡಿದ ರೀತಿ ಥೀಂ ಪಾರ್ಕ್ ನಲ್ಲಿ ಕಳ್ಳತನವನ್ನೂ ನಡೆಸಿ ಪಾಳು ಬೀಳಿಸಿದರು.


ಅಷ್ಟಕ್ಕೂ ಈ ಪ್ರಕರಣದಲ್ಲಿ ಜಿಲ್ಲಾಡಳಿತದ ವೈಫಲ್ಯ ಎದ್ದು ಕಾಣುತ್ತಿದೆ. ಥೀಂ ಪಾರ್ಕ್ ಗೆ ಸಾರ್ವಜನಿಕ ಪ್ರವೇಶವನ್ನು ನಿರಾಕರಿಸಿ
( ಸೆ.2023) ಸ್ಥಳೀಯ ಆಡಳಿತ ಆದೇಶ ಹೊರಡಿಸಿದ್ದರೂ ಕೆಲವರು ಕಾನೂನು ಬಾಹಿರವಾಗಿ ಇಲ್ಲಿಗೆ ಒಳನುಗ್ಗಿ ವಿಡಿಯೋ ಚಿತ್ರೀಕರಣ ನಡೆಸಿದ್ದರು.ಇದೆಲ್ಲದರ ಮಧ್ಯೆಯೇ ಕಳ್ಳತನ ನಡೆದಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದವರನ್ನೂ ವಿಚಾರಣೆಗೆ ಒಳಪಡಿಸುವ ಜತೆಗೆ ಕಳ್ಳತನ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸುತ್ತೇನೆ.ಕಾರ್ಕಳದ ಪ್ರವಾಸೋದ್ಯಮಕ್ಕೆ ಕೊಳ್ಳಿ ಇಟ್ಟ ಕಾಂಗ್ರೆಸ್ ನಾಯಕರನ್ನು ಇತಿಹಾಸ ಕ್ಷಮಿಸದು.



