ಬೈಲೂರು ಪರಶುರಾಮ ಥೀಮ್ ಪಾರ್ಕ್ನಲ್ಲಿ ನಡೆದ ತಾಮ್ರದ ಹೊದಿಕೆ ಕಳವು ಪ್ರಕರಣದಲ್ಲಿ ಕಾರ್ಕಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಮಂಗಳೂರು ಕಳವಾರು ಚರ್ಚ್ ಗುಡ್ಡೆಯ ಆರೀಫ್ ಅಲಿಯಾಸ್ ಮುನ್ನ (37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಎಂದು ತಿಳಿದು ಬಂದಿದೆ.
ಜನವರಿ 3ರ ರಾತ್ರಿ ಈ ಕಳ್ಳರು ಪರಶುರಾಮ ಥೀಮ್ ಪಾರ್ಕ್ನ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ, ಮೇಲ್ಛಾವಣಿಗೆ ಅಳವಡಿಸಲಾಗಿದ್ದ ತಾಮ್ರದ ಹೊದಿಕೆಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಸಂಬಂಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಅವರ ನಿರ್ದೇಶನದಂತೆ ಆರೋಪಿಗಳ ಪತ್ತೆಗೆ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆದ ತೀವ್ರ ಶೋಧ ಕಾರ್ಯದ ವೇಳೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ
ಇವರಿಂದ ಪೊಲೀಸರು ಸುಮಾರು ₹45,000 ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ₹1,200 ಮೌಲ್ಯದ ಎರಡು ಸೀಲಿಂಗ್ ಫ್ಯಾನ್ಗಳು, ಕೃತ್ಯಕ್ಕೆ ಬಳಸಿದ ₹1 ಲಕ್ಷ ಮೌಲ್ಯದ ಗೂಡ್ಸ್ ಆಟೋರಿಕ್ಷಾ ಹಾಗೂ ₹70,000 ಮೌಲ್ಯದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಬಂಧಿತ ಆರೀಫ್ ಅಲಿಯಾಸ್ ಮುನ್ನ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ, ಕಾರ್ಕಳ ಗ್ರಾಮಾಂತರ, ಮೂಲ್ಕಿ ಹಾಗೂ ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ 9ಕ್ಕೂ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗಿವೆ. ಅಬ್ದುಲ್ ಹಮೀದ್ ವಿರುದ್ಧ ಬಜ್ಪೆ ಮತ್ತು ಮೂಡಬಿದ್ರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳ ದಾಖಲೆಗಳಿವೆ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಕಾರ್ಕಳ ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ಅವರ ನೇತೃತ್ವದಲ್ಲಿ, ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್., ವಿವಿಧ ಠಾಣೆಗಳ ಎಸ್ಸೈಗಳು ಮತ್ತು ಸಿಬ್ಬಂದಿಗಳು ನಡೆಸಿದರು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

