ಕಾರ್ಕಳ

ಹೆಬ್ರಿ: ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ

ಹೆಬ್ರಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ಜೂನ್ ೧೮ರ ಗುರುವಾರದಂದು ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀನಿವಾಸ ಭಂಡಾರಿ ಅವರು ವಹಿಸಿದ್ದರು. ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್. ನಾಗರಾಜ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಸಾಪ ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಹೆಬ್ರಿ ತಾಲೂಕು ಆರನೆಯ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದ ಶೇಡಿಮನೆಯ ಸುಧಾಕರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿದ್ದ ಶಂಕರ ಪೂಜಾರಿ ಶೇಡಿಮನೆ, ಜಿಲ್ಲಾ ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿರಾವ್ ಉಪನ್ಯಾಸಕರಾದ ದೀಪಕ್ ಎನ್. ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಎಸ್.ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಪೂರ್ಣ ಅಂಕ ಪಡೆದ 18 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ನಾಗರಾಜ ಶೆಟ್ಟಿಯವರು ಮಾತನಾಡಿ ಮಾಧ್ಯಮ ಯಾವುದೇ ಇದ್ದರೂ ವಿದ್ಯಾರ್ಥಿಗಳು ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮತ್ತಷ್ಟು ಬೆಳೆಯಬೇಕು. ಕನ್ನಡವು ಹೃದಯದ ಭಾಷೆಯಾಗಿದ್ದು, ಅದು ಮಾತನಾಡಲು ಸರಾಗ ಮತ್ತು ಸರಳವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರುಹಿರಿಯರಿಗೆ ಸದಾ ಗೌರವ ಸಲ್ಲಿಸಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕಸಾಪ ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಅವರು, “ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತು ಘಟಕವು ನಿರಂತರವಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಕನ್ನಡ ಭಾಷೆಯಲ್ಲಿ ಪೂರ್ಣ ಅಂಕಗಳನ್ನು ಪಡೆಯುವುದು ಸುಲಭದ ಮಾತಲ್ಲ. ಅಂತಹ ಅಸಾಧಾರಣ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸುತ್ತಿರುವ ಹೆಬ್ರಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯವು ನಿಜಕ್ಕೂ ಶ್ಲಾಘನೀಯ” ಎಂದು ಪ್ರಶಂಸಿಸಿದರು.

ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಕನ್ನಡ ಭಾಷಾ ಶಿಕ್ಷಕ ಹಾಗೂ ಉಪನ್ಯಾಸಕರಾದ ದೀಪಕ್ ಎನ್. ಸ್ವಾಗತಿಸಿದರು. ಕಸಾಪ ಹೆಬ್ರಿ ಘಟಕದ ಗೌರವ ಕಾರ್ಯದರ್ಶಿ ಮಂಜುನಾಥ ಕೆ. ಶಿವಪುರ ಕಾರ್ಯಕ್ರಮವನ್ನು ನಿರೂಪಿಸಿದರು. ಕಸಾಪ ಪದಾಧಿಕಾರಿ ಮಹೇಶ ಹೈಕಾಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು, ಅವರ ಪೋಷಕರು, ಅಧ್ಯಾಪಕ ವೃಂದದವರು ಹಾಗೂ ಕಸಾಪ ತಾಲೂಕು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಫೆಬ್ರವರಿ 3 ಮಂಗಳವಾರದಂದು ಲಿವರ್ & ಲಿವರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್

Madhyama Bimba

ಜೇಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಷರಾಭ್ಯಾಸ ಕಾರ್ಯಕ್ರಮ

Madhyama Bimba

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಮೊದಲ 10ರ ಸ್ಥಾನದಲ್ಲಿ ಜ್ಞಾನಸುಧಾದ 49 ವಿದ್ಯಾರ್ಥಿಗಳು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More