ಮೂಡುಬಿದಿರೆ : ವಿದ್ಯಾರ್ಥಿ ಸಮುದಾಯವು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತರಾಗಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಾಣದಲ್ಲಿ ಸಕ್ರಿಯ ಪಾತ್ರವಹಿಸಬೇಕು ಎಂದು ಮೂಡುಬಿದಿರೆ ಆರಕ್ಷಕ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರತಿಭಾ ಕೆ.ಎಸ್. ಹೇಳಿದರು.
ಅವರು ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಮಾದಕ ವ್ಯಸನವು ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದುಕಿನ ಮೇಲೆ ಉಂಟು ಮಾಡುವ ದುಷ್ಪರಿಣಾಮಗಳನ್ನುವಿವರಿಸಿದ ಅವರು, ಕ್ಷಣಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ಸ್ನೇಹ, ಸತ್ ಪ್ರವೃತ್ತಿ ಮತ್ತು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಯುವಜನತೆ ವ್ಯಸನ ಮುಕ್ತ ಜೀವನ ಶೈಲಿಯನ್ನು ರೂಢಿಸಿಕೊಂಡಾಗ ಮಾತ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪುಷ್ಪರಾಜ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ ಹಾಗೂ ಕಾನೂನು ಅರಿವು ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾದಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಬದ್ಧರಾಗಿ ಕಾರ್ಯ ನಿರ್ವಹಿಸುವ ಪ್ರತಿಜ್ಞಾ ವಿಧಿಯನ್ನುವಿದ್ಯಾರ್ಥಿಗಳಿಗೆ ಬೋಧಿಸಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ ಮಾದಕ ವ್ಯಸನದವಿರುದ್ಧ ಜಾಗೃತಿ ಮೂಡಿಸುವ ಸಂಕಲ್ಪ ಮಾಡಿದರು.
ಕಾರ್ಯಕ್ರಮದಲ್ಲಿ ಸಿಇಟಿ ಸಂಯೋಜಕರಾದ ರಂಜಿತ್ ಜೈನ್, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಶೃತಿ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲರಾದ ಸುನಾದರಾಜ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.
