ಮೂಡುಬಿದಿರೆ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನೆ ಸಭೆಯು ಗ್ಯಾರಂಟಿ ಯೋಜನೆಯ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜುಲೈ 10 ರಂದು ಪಂಚ ಗ್ಯಾರಂಟಿ ಯೋಜನೆಯ ಕಚೇರಿಯಲ್ಲಿ ನಡೆಯಿತು.
ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಮೆಸ್ಕಾಂನ ಸಹಾಯಕ ಲೆಕ್ಕಾಧಿಕಾರಿ ರವಿಚಂದ್ರ ಕೋಟ್ಯಾನ್ ಅವರು , ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ನಡೆಯಲಿದೆ ಎಂದರು. ಮೆಸ್ಕಾಂ ಸಿಬ್ಬಂದಿಗಳು ಬರುವಾಗ ಫಲಾನುಭವಿಗಳು ಸರಿಯಾದ ಮಾಹಿತಿಯನ್ನು ನೀಡಲು ಗ್ಯಾರಂಟಿ ಯೋಜನೆಯ ಸದಸ್ಯರಲ್ಲಿ ಸಹಕಾರ ನೀಡುವಂತೆ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ ಸಭೆಯಲ್ಲಿ ತಿಳಿಸಿದರು.
ಶಕ್ತಿಯೋಜನೆಯಡಿ ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ ಪಡೆಯಲು ಸೇವಾ ಸಿಂಧು ಮೂಲಕ ಆನ್ ಲೈನ್ ನೊಂದಾವಣೆ ಮಾಡಿಕೊಂಡು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅನ್ನು ಮಂಗಳೂರಿನ ಕರ್ನಾಟಕ ಒನ್ ಕಚೇರಿಯಲ್ಲಿ ಪಡೆಯಬಹುದು ಎಂದು ಅಧಿಕಾರಿಗಳು ತಿಳಿಸಿದರು.
ಯುವನಿಧಿ ಯೋಜನೆಯಲ್ಲಿ ಒಟ್ಟು 302 ಫಲಾನುಭವಿಗಳು ಈ ಯೋಜನೆಯ ಪ್ರಯೋಜನವನ್ನು ಪಡೆದಿರುತ್ತಾರೆ. ಮೂಡುಬಿದಿರೆ ತಾಲೂಕಿನಲ್ಲಿ ಒಟ್ಟು82,84,500 ಡಿ.ಬಿ.ಟಿ. ಮೂಲಕ ಹಣ ಪಾವತಿ ಪಡೆದಿರುತ್ತಾರೆ ಎಂದು ಯುವನಿಧಿ ಪ್ರಥಮ ದರ್ಜೆ ಲೆಕ್ಕಸಹಾಯಕರಾದ ಅರುಣ್ ಕುಮಾರ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಗಳಾದ ಮಹೇಶ್ ಕುಮಾರ್ ಹೊಳ್ಳ, ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು, ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು. ಪಂಚ ಗ್ಯಾರಂಟಿ ಯೋಜನೆಯ ವಿಷಯ ನಿರ್ವಾಹಕರಾದ ಸುನಂದಾ ಬಿ.ಜೈನ್ ಸ್ವಾಗತಿಸಿ, ವಂದಿಸಿದರು.
