ಮೂಡುಬಿದಿರೆ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ, ಮೂಡುಬಿದಿರೆ ವಲಯದ 16ನೇ ವಾರ್ಷಿಕ ಸಭೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು.
ಎಸ್ ಕೆ ಮೂಡುಬಿದಿರೆ ವಲಯದ ಅಧ್ಯಕ್ಷರಾದ ನಿತಿನ್ ಬೆಳುವಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ಕೆಪಿಎ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ನವೀನ್ ರೈ ಪಂಜಳ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ನವೀನ್ ರೈ ಅವರು, ಜಿಲ್ಲಾ ಸಂಘಟನೆಯು ಸದಸ್ಯರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ನಿರ್ಧರಿಸಿದೆ ಎಂದು ತಿಳಿಸಿದರು. ಈ ಎಲ್ಲಾ ಕಾರ್ಯಕ್ರಮ ಮತ್ತು ಯೋಜನೆಗಳ ಯಶಸ್ಸಿಗೆ ಪ್ರತಿಯೊಬ್ಬ ಸದಸ್ಯರ ಸಂಪೂರ್ಣ ಸಹಕಾರ ಹಾಗೂ ಬೆಂಬಲ ಅಗತ್ಯ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಮೂಡುಬಿದಿರೆ ವಲಯದ ಗೌರವಾಧ್ಯಕ್ಷ ಉದಯ ಕುಮಾರ್ ಭಟ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವಿ ಕೋಟ್ಯಾನ್, ಎಸ್ಕೆಪಿಎ ಬ್ಯಾಂಕ್ ನಿರ್ದೇಶಕರಾದ ರಾಮ ಕೋಟ್ಯಾನ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ವಿಲ್ಫ್ರೆಡ್ ಮೆಂಡೋನ್ಸಾ, ವಲಯ ಉಪಾಧ್ಯಕ್ಷರಾದ ರಂಜಿತ್ ಕೋಟ್ಯಾನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಂಘದ ವಾರ್ಷಿಕ ಚಟುವಟಿಕೆಗಳು, ಛಾಯಾಗ್ರಾಹಕರಿಗೆ ಸಂಬಂಧಿಸಿದ ವಿವಿಧ ವಿಚಾರಗಳು ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಸಂಘದ ಸದಸ್ಯರ ವೃತ್ತಿಪರ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಪೂರಕವಾದ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಅಭಿಪ್ರಾಯ ವಿನಿಮಯ ನಡೆಯಿತು.
ವಲಯದ ಕೋಶಾಧಿಕಾರಿ ಪದ್ಮನಾಭ ಮಿಜಾರ್ ವಾರ್ಷಿಕ ಆಯವ್ಯಯ ಮಂಡಿಸಿದರು. ವಲಯ ಕಾರ್ಯದರ್ಶಿ ನಮೀತ್ ಬಂಗೇರ ಧನ್ಯವಾದ ಸಲ್ಲಿಸಿದರು.
ಮೂಡುಬಿದಿರೆ ವಲಯದ ಪದಾಧಿಕಾರಿಗಳು, ಸದಸ್ಯರು ಹಾಗೂ ಛಾಯಾಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
