ಕುಂದಾಪುರ ತಾಲೂಕು ಕನ್ನಡ ಪ್ರಭ ಪತ್ರಿಕೆಯ ವರದಿಗಾರರಾದ ಶ್ರೀಕಾಂತ್ರವರ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ಆಪಾದಿತ ಡಾ ಮಹೇಂದ್ರ ಕುಮಾರ್ ಶೆಟ್ಟಿಯವರ ಮೇಲೆ ಪ್ರಕರಣ ದಾಖಲಾಗಿದೆ.
ಹಿಂದೆ ಕುಂದಾಪುರ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆಯ ವೈದ್ಯರು ಒಳರೋಗಿಗಳಿಂದ ಚಿಕಿತ್ಸೆಯ ಸಮಯ ಹಣ ಪಡೆಯುತ್ತಿರುವ ಬಗ್ಗೆ ಕನ್ನಡ ಪ್ರಭಾ ಪತ್ರಿಕೆಯು ವರದಿ ಪ್ರಕಟಿಸಿತ್ತು. ಈ ವಿಚಾರದಲ್ಲಿ ಡಾ. ಮಹೇಂದ್ರ ಕುಮಾರ್ ಶೆಟ್ಟಿ ದ್ವೇಷಗೊಂಡು ವರದಿಗಾರ ಶ್ರೀಕಾಂತ್ರ ಮೇಲೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ : 71/2026 ಕಲಂ. 126(2) 115(2) 352 351(2) BNS ರಂತೆ ಪ್ರಕರಣ ದಾಖಲಾಗಿದೆ.
ಖಂಡನೆ:
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ ಆಸ್ಪತ್ರೆಯ ವರದಿಗೆ ಸಂಬಂಧಿಸಿ ಅಲ್ಲಿನ ವೈದ್ಯಾಧಿಕಾರಿಯಾಗಿದ್ದ ಡಾ.ಮಹೇಂದ್ರ ಶೆಟ್ಟಿ, ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ, ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ ಕುರ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
