ಮೂಡುಬಿದಿರೆ ತಹಶೀಲ್ದಾರ್ ನೇತೃತ್ವದಲ್ಲಿ ಇತೀಚೆಗೆ ಆಡಳಿತ ಸೌಧದಲ್ಲಿ ನಡೆದ ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಗ ಯಶಸ್ವಿಯಾಗಿದೆ. ಇಂತಹ ಸಭೆಯಲ್ಲಿ ಭಾಗವಹಿಸುವಾಗ ಅಧಿಕಾರಿಗಳಿಗೆ ನಾವು ಗೌರವದಿಂದ ನಡೆಸಿಕೊಡಬೇಕು ಎಂದು ಸುವರ್ಣ ಕರ್ನಾಟಕ ರಾಜ್ಯ ಸಮಿತಿ ಜೈ ಭೀಮ್ ಯುವಸೇನೆಯ ರಾಜ್ಯಾಧ್ಯಕ್ಷ, ಸಂಸ್ಥಾಪಕ ವರ್ತೂರ್ ಮಂಜುನಾಥ್ ಅಭಿಪ್ರಾಯಪಟ್ಟರು.
ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಭೆಗೆ ಸಮಾಜ ಕಲ್ಯಾಣ ಇಲಾಖೆಯ ಪ್ರತಿನಿಧಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಇತರ ಅಧಿಕಾರಿಗಳು ಹಾಜರಿದ್ದರು. ಅಧಿಕಾರಿಗಳ ಸಮ್ಮುಖದಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳುವ ಅವಕಾಶವಿರುವಾಗ ನಾವು ಬಳಸಿಕೊಳ್ಳುವಂತಾಗಬೇಕು ಎಂದು ವರ್ತೂರ್ ಮಂಜುನಾಥ್ ತಿಳಿಸಿದರು.
ಈ ಸಭೆಯಲ್ಲಿ ಸುಮಾರು 25ರಿಂದ 30 ಮಂದಿ ಭಾಗವಹಿಸಿದ್ದರು. ಕೆಲವರು ಸಭೆಯಿಂದ ಹೊರಗೆ ತೆರಳಿದ ಬಳಿಕವೂ ಸಮಸ್ಯೆಗಳ ಕುರಿತು ಚರ್ಚೆ ಮುಂದುವರಿಯಿತು. ತಹಶೀಲ್ದಾರ್ ಅವರು ಹಲವು ವಿಚಾರಗಳಿಗೆ ಸ್ಪಂದಿಸಿ, ಮುಂದಿನ ಸಭೆಗೆ ಸಂಬಂಧಪಟ್ಟವರಿಗೆ ನೋಟಿಸ್ ನೀಡುವುದಾಗಿ ತಿಳಿಸಿದ್ದರು.
ಡಿಸಿ ಮನ್ನಾ ಜಾಗ, ಪೌತಿ ಖಾತೆ ಹಾಗೂ ಎಸ್ಸಿ ಸಮುದಾಯದ ಪೂರ್ವಿಕರ ಹೆಸರಿನಲ್ಲಿರುವ ಜಾಗಗಳ ಸಮಸ್ಯೆಯನ್ನೂ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ. ಪೂರ್ವಿಕರ ಹೆಸರಿನಲ್ಲಿರುವ ಹೆಚ್ಚಿನ ಜಾಗಗಳನ್ನು ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಅನುಭವಿಸುವ ಅವಕಾಶ ಸಿಗದಿರುವ ಬಗ್ಗೆ ಗಮನ ಸೆಳೆಯಲಾಗಿದೆ. ಈ ವಿಚಾರದಲ್ಲಿ ಆಂದೋಲನ ನಡೆಸುವ ಮೂಲಕ ಆರ್ಥಿಕವಾಗಿ ಬೆಳೆಯಲು ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅವಕಾಶ ಕಲ್ಪಿಸುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಅಧಿಕಾರಿಗಳು ಸ್ಪಂದಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಎಸ್ಸಿ-ಎಸ್ಟಿ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ತಹಶೀಲ್ದಾರ್ ಕಚೇರಿಯಲ್ಲಿ ಸಭೆ ನಡೆಸಬೇಕು ಎಂದು ಸಮಿತಿ ಒತ್ತಾಯಿಸಿದೆ. ಅಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಿಂಗಳಿಗೆ ಒಂದು ದಿನಾಂಕ ನಿಗದಿಪಡಿಸಿ ಎಸ್ಸಿ-ಎಸ್ಟಿ ಸಮಸ್ಯೆಗಳ ಕುರಿತು ಸಭೆ ನಡೆಸಿದರೆ, ಸ್ಥಳೀಯವಾಗಿಯೇ ಹಲವು ಸಮಸ್ಯೆಗಳನ್ನು ಪರಿಹರಿಸಬಹುದು. ಪೊಲೀಸ್ ಠಾಣೆಗಳಲ್ಲಿ ಮೂರನೇ ವಾರದಲ್ಲಿ ಎಸ್ಸಿ-ಎಸ್ಟಿ ಸಭೆ ನಡೆಯುವ ರೀತಿಯಲ್ಲಿ ಪಂಚಾಯಿತಿಗಳಲ್ಲೂ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.
ಸಭೆಯಲ್ಲಿ ಮಂಡಿಸಿದ ವಿಚಾರಗಳಿಗೆ ಅಧಿಕಾರಿಗಳು ಸ್ಪಂದಿಸಿದ್ದು, ಮುಂದಿನ ಸಭೆಯಲ್ಲಿ ಕ್ರಮಗಳ ಪ್ರಗತಿ ತಿಳಿಯಲಿದೆ ಎಂದು ಅವರು ಹೇಳಿದರು. ಸ್ಮಶಾನ ಜಾಗ ಹಾಗೂ ಪೌತಿ ಖಾತೆಗಳ ಸಮಸ್ಯೆಗಳ ಕುರಿತು ದಾಖಲೆಗಳನ್ನು ಪರಿಶೀಲಿಸಿ ಮುಂದಿನ ಹಂತದಲ್ಲಿ ಆಂದೋಲನ ನಡೆಸುವ ಬಗ್ಗೆ ಭರವಸೆ ನೀಡಲಾಗಿದೆ ಎಂದು ತಿಳಿಸಿದರು.
ಮೂಡುಬಿದಿರೆ ತಾಲೂಕು ಘಟಕದ ಸದಸ್ಯ ರಾಜೇಶ, ಮೂಡುಬಿದಿರೆ ತಾಲೂಕು ಘಟಕದ ಸಹ ಕಾರ್ಯದರ್ಶಿ ಸಂತೋಷ್ ಕುಮಾರ್, ಉಡುಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಾರ್ಕಳ, ದಕ್ಷಿಣ ಕನ್ನಡ ಜಿಲ್ಲೆಯ ಸದಸ್ಯ ದಯಾನಂದ್ ಹಾಗೂ ಮೂಡುಬಿದಿರೆ ತಾಲೂಕು ಘಟಕದ ಸದಸ್ಯ ಸುನಿಲ್ ಅವರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
