ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವಾದ ಆಳ್ವಾಸ್ ನುಡಿಸಿರಿ-ವಿರಾಸತ್ನ್ನು ಅರ್ಥಪೂರ್ಣ ಹಾಗೂ ವೈವಿಧ್ಯಮಯವಾಗಿ ರೂಪಿಸುವ ನಿಟ್ಟಿನಲ್ಲಿ ಹಂಸನಗರದ ಶೋಭಾ ಅತಿಥಿಗೃಹದಲ್ಲಿ ಎರಡನೇ ಹಂತದ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಕಾರ್ಯಕ್ರಮದ ಸಮಗ್ರ ರೂಪುರೇಷೆ, ವೇದಿಕೆ ಹಾಗೂ ಕಾರ್ಯಕ್ರಮಗಳ ನಿರ್ವಹಣೆಯ ಕುರಿತು ಚರ್ಚಿಸಲಾಯಿತು.
ಸಾಹಿತ್ಯ, ಕಲೆ, ಸಂಸ್ಕೃತಿ, ವಿಜ್ಞಾನ, ಕೃಷಿ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳ ವಿಸ್ತ್ರತ ಪರಿಚಯವನ್ನು ಸಾಹಿತ್ಯ-ಸಾಂಸ್ಕೃತಿಕ ಆಸಕ್ತರಿಗೆ ಒದಗಿಸುವ ಉದ್ದೇಶದಿಂದ ವಿವಿಧ ಪ್ರದರ್ಶನಗಳು, ಮೇಳಗಳು, ಸಂವಾದಗಳು, ಗೋಷ್ಠಿಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ರೂಪುರೇಷೆ ಸಿದ್ಧಪಡಿಸಲಾಯಿತು. ಹಿರಿಯ ವಿದ್ವಾಂಸರು, ಸಾಹಿತಿಗಳು, ಕಲಾವಿದರು, ಚಿಂತಕರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಮೂಲಕ ಜ್ಞಾನ ಮತ್ತು ಅನುಭವದ ವಿನಿಮಯಕ್ಕೆ ಅವಕಾಶ ಕಲ್ಪಿಸುವ ಆಶಯವನ್ನು ಹೊಂದಲಾಗಿದೆ. ಹೊಸ ತಲೆಮಾರಿನೊಂದಿಗೆ ಕನ್ನಡದ ಸಾಹಿತ್ಯ-ಸಾಂಸ್ಕೃತಿಕ ಪರಂಪರೆಯನ್ನು ಬೆಸೆಯುವ ಮೂಲಕ ಭವಿಷ್ಯದ ಚಿಂತನೆಗೆ ದಾರಿ ಮಾಡಿಕೊಡುವುದು ಕಾರ್ಯಕ್ರಮದ ಪ್ರಮುಖ ಆಶಯವಾಗಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಆಳ್ವಾಸ್ ನುಡಿಸಿರಿ ವಿರಾಸತ್ನ ಕಾರ್ಯಕಾರಿ ಸಮಿತಿಯ ಪ್ರಮುಖರಾದ ಡಾ. ಧನಂಜಯ ಕುಂಬ್ಳೆ, ಡಾ. ಎಂ.ಪಿ. ಶ್ರೀನಾಥ್, ಡಾ. ಬಿ ಜನಾರ್ದನ ಭಟ್, ವೇಣುಗೋಪಾಲ್ ಶೆಟ್ಟಿ ಸೇರಿದಂತೆ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಡಾ ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು.
