ನೀಟ್ ಪರೀಕ್ಷೆಯಲ್ಲಿ ಅಕ್ರಮದ ಕಾರಣಕ್ಕೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ವಾಲ್ಮೀಕಿ ಹಗರಣದಲ್ಲಿ ಸಿಲುಕಿರುವ ರಾಜ್ಯ ಸರಕಾರದ ಸಚಿವ ನಾಗೇಂದ್ರ ರಾಜೀನಾಮೆ ನೀಡಿರುವಂತೆ ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಿಸಿ ಭ್ರಷ್ಠಾಚಾರ ನಡೆಸಿರುವ ಸುನಿಲ್ ಕುಮಾರ್ ರಾಜೀನಾಮೆ ನೀಡುವಂತೆ ಒತ್ತಾಯಿಸಿ ಪೋಸ್ಟರ್ ಅಭಿಯಾನಕ್ಕೆ ಪೊಲೀಸರು ತಡೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಕಾಂಗ್ರೆಸ್ ಕಚೇರಿಯಿಂದ ಕಾಂಗ್ರೆಸಿನ ಕಾರ್ಯಕರ್ತರು ಜಮಾವಣೆಗೊಂಡು ಶಾಸಕರ ಮನೆಗೆ ಪೋಸ್ಟರ್ ಅಂಟಿಸಲು ತೆರಳುತ್ತಿರುವವಾಗ ಸರ್ವಜ್ಞ ವೃತ್ತ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ಸಂದರ್ಭ ಕಾಂಗ್ರೆಸಿನ ಪ್ರತಿಭಟನಾಕಾರರು ಸುನಿಲ್ ಕುಮಾರ್ ರಾಜೀನಾಮೆ ನೀಡಲೇಬೇಕು ಎಂದು ಒತ್ತಾಯಿಸಿ ರಸ್ತೆಯಲ್ಲಿಯೇ ಪ್ರತಿಭಟನೆ ನಡೆಸಿದರು.
ಈ ಪೋಸ್ಟರ್ ಅಭಿಯಾನವು ಇಂದು, ನಾಳೆಗೆ ಮಾತ್ರ ಸೀಮಿತವಾಗದೆ ಮುಂದಿನ ದಿನದಲ್ಲಾದರೂ ಅವರ ಮನೆಗೆ ಪೋಸ್ಟರ್ ಅಂಟಿಸುವುದಾಗಿ ತಿಳಿಸಿದರು.
ಬಿಜೆಪಿ ಕಾರ್ಯಕರ್ತರು ಜಮೆ
ಕಾಂಗ್ರೆಸಿನ ಪೋಸ್ಟರ್ ಅಭಿಯಾನಕ್ಕೆ ಬಿಜೆಪಿ ಕಾರ್ಯಕರ್ತರು ಪ್ರತಿರೋಧ ವ್ಯಕ್ತಪಡಿಸಿ ಶಾಸಕರ ಮನೆ, ಕಚೇರಿ ಹಾಗೂ ಬಿಜೆಪಿ ಕಚೇರಿಯಲ್ಲಿ ಜಮಾವಣೆಗೊಂಡಿದ್ದಾರೆ. ವಿವಿಧ ಕಡೆಗಳಿಂದ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸರ ಜಮೆ
ಕಾಂಗ್ರೆಸಿನ ಪೋಸ್ಟರ್ ಅಭಿಯಾನಕ್ಕೆ ತಡೆ ನೀಡಲು ಹೆಚ್ಚುವರಿ ಪೊಲೀಸರು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತು ಮಾಡಿದ್ದಾರೆ.
