ಮೂಡುಬಿದಿರೆಯ ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ದಿನಾಂಕ ಇಂದು ಅಗ್ನಿ ಅವಘಡಗಳು ಹಾಗೂ ಅಗ್ನಿಶಮನ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಯಿತು.
ಮೂಡುಬಿದಿರೆ ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ದಿವಾಕರ್ ಆಚಾರ್ಯ ಅವರ ನೇತೃತ್ವದಲ್ಲಿ ಅಗ್ನಿಶಾಮಕ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಿವಿಧ ರೀತಿಯ ಬೆಂಕಿಯನ್ನು ನಂದಿಸುವ ವಿಧಾನಗಳು ಹಾಗೂ ಅಗ್ನಿಶಾಮಕ ಉಪಕರಣಗಳ ಸುರಕ್ಷಿತ ಬಳಕೆಯ ಕುರಿತು ಪ್ರಾಯೋಗಿಕವಾಗಿ ವಿವರಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿಶಾಮಕ ಸಾಧನಗಳನ್ನು ಬಳಸುವ ವಿಧಾನವನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಿಕೊಡಲಾಯಿತು. ತುರ್ತು ಸಂದರ್ಭದಲ್ಲಿ ಆತಂಕಕ್ಕೊಳಗಾಗದೆ,ಸಮಯಪ್ರಜ್ಞೆಯಿಂದ ಹಾಗೂ ಸುರಕ್ಷಿತವಾಗಿ ಕಾರ್ಯನಿರ್ವಹಿಸುವ ಕುರಿತು ಸಿಬ್ಬಂದಿಗಳು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ಅಭಯಚಂದ್ರ ಜೈನ್, ಎ.ಜಿ. ಸೋನ್ಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಕಾಂತ್ ಹೊಳ್ಳ, ಅಧ್ಯಾಪಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
